ಬೆಂಗಳೂರು (ಸೆ.9): ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯ ಅರ್ಹತೆಯನ್ನು ಪ್ರಸ್ತುತ ಸೇವೆಯಲ್ಲಿರುವ ಶಿಕ್ಷಕರಿಗೆ ಪೂರ್ವಾನ್ವಯಗೊಳಿಸದಂತೆ ಸಚಿವ ಸಂಪುಟದಲ್ಲಿ ದೃಢ ನಿರ್ಧಾರ ಕೈಗೊಂಡು ಲಕ್ಷಾಂತರ ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಸರ್ಕಾರವನ್ನು ಒತ್ತಾಯಿಸಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ, ಪ್ರಧಾನ ಕಾರ್ಯದರ್ಶಿ ಚೇತನ್ ಎಚ್.ಎಸ್. ಮತ್ತಿತರ ಪದಾಧಿಕಾರಿಗಳು, ನಮ್ಮ ಸಂಘವು ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸುತ್ತದೆ. ಹಾಲಿ ಸೇವೆಯಲ್ಲಿರುವ ಶಿಕ್ಷಕರಿಗೂ ಸೇವೆಯಲ್ಲಿ ಮುಂದುವರೆಯಲು ಮತ್ತು ಬಡ್ತಿಗಾಗಿ ಟಿಇಟಿ ಪಾಸು ಮಾಡಬೇಕೆಂದು ತೀರ್ಪಿನಲ್ಲಿ ಸೂಚಿಸಲಾಗಿದೆ. ಇದು ಅಧಿಕೃತ ಮತ್ತು ಹಲವು ವರ್ಷಗಳಿಂದ ವೃತ್ತಿಯಲ್ಲಿರುವ ಶಾಲಾ ಶಿಕ್ಷಕರ ಹಿತಾಸಕ್ತಿಗೆ ವಿರುದ್ಧವಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿನಿಂದ 1.68 ಲಕ್ಷ ಶಿಕ್ಷಕರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ. ಹಾಗಾಗಿ ಈ ತೀರ್ಪನ್ನು ವಿನಮ್ರವಾಗಿ ಪರಿಶೀಲಿಸಿ ಸೇವಾನಿರತ ಶಿಕ್ಷಕರಿಗೆ ಟಿಇಟಿ ಅರ್ಹತೆಯಿಂದ ವಿನಾಯಿತಿ ನೀಡಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಸಂಕಷ್ಟದಿಂದ ಪಾರು ಮಾಡಬೇಕು ಎಂದು ಕೋರಿದ್ದಾರೆ.