ಬೈಎಲೆಕ್ಷನ್: ಬಿಜೆಪಿಯಿಂದ ಬಾಗಲಕೋಟೆಗೆ ಚರಂತಿಮಠ? ದಾವಣಗೆರೆಯಿಂದ ಅಚ್ಚರಿ ಅಭ್ಯರ್ಥಿ ಘೋಷಣೆ ಸಾಧ್ಯತೆ
ಬೆಂಗಳೂರು: ಮುಂಬರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಿದ್ಧತೆ ಆರಂಭಿಸಿರುವ ಪ್ರಮುಖ ಪ್ರತಿಪಕ್ಷ ಬಿಜೆಪಿ, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಿದೆ.m ಮಾಜಿ ಶಾಸಕ ವೀರಣ್ಣ ಚರಂತಿಮಠ ಹೆಸರು ಬಹುತೇಕ ಅಂತಿಮ
ಶುಕ್ರವಾರ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಬಾಗಲಕೋಟೆ ಕ್ಷೇತ್ರದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರ ಹೆಸರನ್ನು ಬಹುತೇಕ ಅಂತಿಮಗೊಳಿಸಲಾಗಿದೆ.
ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ಇನ್ನೂ ತುಸು ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ. ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಸೇರಿ ಅಜೆಯ್ ಕುಮಾರ್, ರಾಜನಹಳ್ಳಿ ಶಿವಕುಮಾರ್, ಶ್ರೀನಿವಾಸ್ ಕರಿಯಪ್ಪ ಮತ್ತಿತರ ಹೆಸರುಗಳು ಪ್ರಸ್ತಾಪವಾಗಿವೆ.
ದಾವಣಗೆರೆ ಜಿಲ್ಲೆಯ ಪಕ್ಷದ ಘಟಕದಲ್ಲಿ ಭಿನ್ನಾಭಿಪ್ರಾಯ ತೀವ್ರವಾಗಿರುವ ಹಿನ್ನೆಲೆಯಲ್ಲಿ ಈ ಉಪಚುನಾವಣೆ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದಿಂದ ಕೋರ್ ಕಮಿಟಿ ಸಭೆಗೂ ಮೊದಲು ಜಿಲ್ಲೆಯ ಮುಖಂಡರೊಂದಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಭೆ ನಡೆಸಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋರ್ ಕಮಿಟಿ ಸಭೆಯಲ್ಲಿ ಮುಂದೆ ಬರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದಿದೆ.
ಆಕಾಂಕ್ಷಿಗಳ ಕುರಿತು ಚರ್ಚೆ ಆಗಿದೆ. ಕೋರ್ ಕಮಿಟಿಯಲ್ಲಿ ಚರ್ಚಿಸಿದ ಹೆಸರುಗಳನ್ನು ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡುತ್ತೇವೆ ಎಂದು ತಿಳಿಸಿದರು.
ಒಂದಾಗಿ ಅಭ್ಯರ್ಥಿ ಗೆಲ್ಲಿಸಿ
ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ್ದೇವೆ. ವಿಧಾನಸಭೆ, ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ನಾವೆಲ್ಲ ಒಂದಾಗಿ, ಒಟ್ಟಾಗಿ ಪ್ರಯತ್ನ ಮಾಡಬೇಕು. ಸಂಪೂರ್ಣ ಶ್ರಮ ಹಾಕಬೇಕೆಂದು ಈ ಸಭೆಯಲ್ಲಿ ತೀರ್ಮಾನ ಆಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ಆಕಾಂಕ್ಷಿಗಳು, ಪಕ್ಷದ ಪ್ರಮುಖರ ಜೊತೆ ಕುಳಿತು ಚರ್ಚಿಸಿ ಹಿಂದೆ ಆಗಿದ್ದನ್ನು ಮರೆತು, ನಾವೆಲ್ಲ ಒಟ್ಟಾಗಿ ಚುನಾವಣೆಯಲ್ಲಿ ಗೆಲ್ಲಲು ಶ್ರಮ ಹಾಕಬೇಕೆಂದು ಸಭೆ ನಡೆಸಿದ್ದೇವೆ ಎಂದು ಹೇಳಿದರು.