ತಮಿಳುನಾಡು ಮಾದಕ ದ್ರವ್ಯಗಳ ಹಬ್: ಡಿಎಂಕೆ ವಿರುದ್ಧ ಪಳನಿಸ್ವಾಮಿ ವಾಗ್ದಾಳಿ
ತಮಿಳುನಾಡಿನ ಪ್ರಸ್ತುತ ಡಿಎಂಕೆ ಸರ್ಕಾರವು ರಾಜ್ಯವನ್ನು ಮಾದಕ ದ್ರವ್ಯಗಳ ತಾಣವನ್ನಾಗಿ ಪರಿವರ್ತಿಸಿದೆ ಎಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ (ಇಪಿಎಸ್) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಸರ್ಕಾರವು ಜನಸಾಮಾನ್ಯರನ್ನು ರಕ್ಷಿಸುತ್ತಿದೆಯೇ ಅಥವಾ ಸಮಾಜವಿರೋಧಿ ಶಕ್ತಿಗಳಿಗೆ ಆಶ್ರಯ ನೀಡುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2021ರಲ್ಲಿ ಸ್ಟಾಲಿನ್ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ ಗಾಂಜಾ , ಅಕ್ರಮ ಮದ್ಯ ಮಾರಾಟ ಮತ್ತು ಡ್ರಗ್ ಮಾಫಿಯಾ ಹಾವಳಿ ಹೆಚ್ಚಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕೂಡ ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ಮಾಧ್ಯಮ ವರದಿಗಳಿಂದ ಸಾಬೀತಾಗಿದೆ ಎಂದು ಬಲಿಯಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕುಸಿತ: ಕಳೆದ ಐದು ವರ್ಷಗಳ ಡಿಎಂಕೆ ಆಡಳಿತದಲ್ಲಿ ಸುಮಾರು 30 ಲಾಕಪ್ ಸಾವುಗಳು ನಡೆದಿವೆ. ಕಳೆದ ಎರಡು ತಿಂಗಳಲ್ಲೇ ನಾಲ್ವರು ದಲಿತ ಯುವಕರು ಪೊಲೀಸ್ ವಶದಲ್ಲಿ ಸಾವನ್ನಪ್ಪಿರುವುದು ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳು ಹಿಂದೆಂದೂ ಕಾಣದ ರೀತಿಯಲ್ಲಿ ಹೆಚ್ಚಿವೆ ಎಂದು ಅವರು ಆರೋಪಿಸಿದ್ದಾರೆ.
ಜನವಿರೋಧಿ ಆಡಳಿತದಿಂದ ರಾಜ್ಯವನ್ನು ಮುಕ್ತಗೊಳಿಸಬೇಕಾದ ಸಮಯ ಬಂದಿದೆ. ಮುಂಬರುವ ದಿನಗಳಲ್ಲಿ ಈ ಅಸಮರ್ಥ ಸರ್ಕಾರವನ್ನು ಕಿತ್ತೊಗೆಯುವ ಮೂಲಕ ಶಾಂತಿ ಮತ್ತು ಸುರಕ್ಷತೆಯನ್ನು ಮರುಸ್ಥಾಪಿಸಲು ಜನರು ಕೈಜೋಡಿಸಬೇಕು ಎಂದು ಜನತೆಗೆ ಕರೆ ನೀಡಿದ್ದಾರೆ
ಆರೋಪಕ್ಕೆ ತಿರುಗೇಟು: ಇತ್ತೀಚೆಗಷ್ಟೇ ತಮಿಳುನಾಡು ಸರ್ಕಾರವು ಈ ಆರೋಪಗಳನ್ನು ನಿರಾಕರಿಸಿದ್ದು, ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂದು ಸ್ಪಷ್ಟಪಡಿಸಿದ್ದರು.