ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮದವರಿಗೆ ಎಸ್ಸಿ ಸ್ಥಾನಮಾನ ಸಿಗಲ್ಲ: SC
ನವದೆಹಲಿ: ಹಿಂದೂ, ಸಿಖ್, ಬೌದ್ಧ ಧರ್ಮ ಹೊರತು ಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಆಂಧ್ರಪ್ರದೇಶ ಹೈಕೋರ್ಟ್ 2025ರ ಮೇ ತಿಂಗಳಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪಾದ್ರಿ ಒನ್ ಚಿಂತದ ಆನಂದ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನಮೋಹನ್ ಅವರಿದ್ದ ದ್ವಿಸದಸ್ಯ ಪೀಠವು ಈ ತೀರ್ಪು ನೀಡಿದೆ.
‘ಹಿಂದೂ, ಸಿಖ್, ಬೌದ್ಧ ಧರ್ಮದ ಹೊರತಾಗಿ ಇತರ ಧರ್ಮವನ್ನು ಅನುಸರಿಸುವ ಯಾವುದೇ ವ್ಯಕ್ತಿಯು ಪರಿಶಿಷ್ಟ ಜಾತಿಯ ಸದಸ್ಯರಾಗಲು ಸಾಧ್ಯವಿಲ್ಲ. ಬೇರೆ ಯಾವುದೇ ಧರ್ಮಕ್ಕೆ ಮತಾಂತರ ಹೊಂದುವುದರಿಂದ ಪರಿಶಿಷ್ಟ ಜಾತಿಯ ಸ್ಥಾನಮಾನವು ರದ್ದಾಗುತ್ತದೆ. ಹೀಗಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಉಲ್ಲಂಘನೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯ ಹೇಳಿದೆ.
ಅಕ್ಕಲ ರಾಮಿರೆಡ್ಡಿ ಮತ್ತು ಇತರರಿಂದ ತಮಗೆ ಜಾತಿ ತಾರತಮ್ಯ ಮತ್ತು ನಿಂದನೆ ಎದುರಾಗಿದೆ ಎಂದು ಆರೋಪಿಸಿ ಪಾದ್ರಿ ಆನಂದ್ ಅವರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರಾಮಿರೆಡ್ಡಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಆನಂದ್ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ತಮ್ಮ ಎಸ್ಸಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಅವರು ಎಸ್ಸಿ/ಎಸ್ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂಬ ಆಧಾರದ ಮೇಲೆ ನ್ಯಾಯಮೂರ್ತಿ ಎನ್. ಹರಿನಾಥ್ ಅವರು ಎಫ್ಐಆರ್ ಅನ್ನು ರದ್ದುಗೊಳಿಸಿದ್ದರು.
ಇದರ ವಿರುದ್ಧ ಆನಂದ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.