ಕರ್ನಾಟಕದಲ್ಲಿ ವರುಣನ ಅಬ್ಬರ.. ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ!
ಮುಂದಿನ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಶುಭ್ರ ಆಕಾಶ ಇರಲಿದ್ದು, ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾವಾತಾವರಣ ನಿರ್ಮಾಣವಾಗಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಪಶ್ಚಿಮ ಬಂಗಾಳದಿಂದ ತಮಿಳುನಾಡಿನ ಮನ್ನಾರ್ ಕೊಲ್ಲಿಯವರೆಗೆ ಒಡಿಶಾ, ತೆಲಂಗಾಣ ಮತ್ತು ರಾಯಲಸೀಮಾ ಮೂಲಕ ಹಾದುಹೋಗಿರುವ ಚಂಡಮಾರುತ ಪ್ರಸರಣದ (Cyclonic Circulation) ಪ್ರಭಾವದಿಂದಾಗಿ ಕರ್ನಾಟಕದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಸಮುದ್ರ ಮಟ್ಟದಿಂದ ಸುಮಾರು 0.9 ಕಿ.ಮೀ ನಿಂದ 1.5 ಕಿ.ಮೀ ಎತ್ತರದಲ್ಲಿ ಗಾಳಿಯ ಪರಿಚಲನೆಯು ಕಂಡುಬಂದಿದ್ದು, ಇದು ಮಳೆಗೆ ಪೂರಕ ವಾತಾವರಣ ನಿರ್ಮಿಸಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದು ಬೆಂಗಳೂರಿನಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ವರುಣನ ಸಿಂಚನವಾಗಲಿದೆ. ಇನ್ನು ಏಪ್ರಿಲ್ 9ರ ಗುರುವಾರದಂದು ಮಳೆಯ ಪ್ರಮಾಣ ತುಸು ಹೆಚ್ಚಾಗಲಿದ್ದು, ರಾಮನಗರ, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 10 ರಿಂದ ಧಾರಾಕಾರ ಮಳೆ!
ರಾಜ್ಯದಲ್ಲಿ ಏಪ್ರಿಲ್ 10ರಿಂದ ಮಳೆಯ ಅಬ್ಬರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮುಂದಿನ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಒಣಹವೆ ಮುಂದುವರಿಯಲಿದ್ದರೂ, ಏಪ್ರಿಲ್ 10ರ ನಂತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಬಿಸಿಲ ಬೇಗೆಯಿಂದ ಕಂಗೆಟ್ಟಿರುವ ಜನರಿಗೆ ಈ ಮಳೆಯು ತಂಪೆರೆಯಲಿದ್ದು, ಕೃಷಿ ಚಟುವಟಿಕೆಗಳಿಗೂ ಸಹಕಾರಿಯಾಗುವ ನಿರೀಕ್ಷೆಯಿದೆ. ಮಾನ್ಸೂನ್ ಮಳೆಯ ಮೇಲೆ ಎಲ್ನಿನೋ ಪ್ರಭಾವ ಇರುವ ಕಾರಣ ಈ ಮಳೆಯು ಹೆಚ್ಚು ಮಹತ್ವ ಪಡೆದುಕೊಂಡಿದೆ.
ಬೆಂಗಳೂರಿನ ಹವಾಮಾನ ಹೇಗಿರಲಿದೆ?
ಮುಂದಿನ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಶುಭ್ರ ಆಕಾಶ ಇರಲಿದ್ದು, ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾವಾತಾವರಣ ನಿರ್ಮಾಣವಾಗಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳ ಕಾಲವೂ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗಿ ನಗರದ ತಾಪಮಾನ ಕುಸಿಯುವ ನಿರೀಕ್ಷೆಯಿದೆ.