ಮೈಸೂರು ಅಶೋಕಪುರಂ ರೈಲ್ವೆ ನಿಲ್ದಾಣ ಹೆಸರು ಬದಲಾವಣೆ; ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
ಮೈಸೂರು (ಏ.10): ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣದ ಹೆಸರು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಗಳಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಇಂದು ತೆರೆ ಎಳೆದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಹೆಸರು ಬದಲಾವಣೆ ಮಾಡುವ ಯಾವುದೇ ಉದ್ದೇಶವಿಲ್ಲ, ಕೇವಲ ಅಭಿವೃದ್ಧಿಯಷ್ಟೇ ನನ್ನ ಗುರಿ' ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣದ ಹೆಸರು ಬದಲಾವಣೆ ವದಂತಿಗಳಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ತೆರೆ ಎಳೆದಿದ್ದಾರೆ. ಹೆಸರು ಬದಲಿಸುವ ಉದ್ದೇಶವಿಲ್ಲ, ಬದಲಾಗಿ 'ಅಮೃತ್ ಭಾರತ್ ಸ್ಟೇಷನ್' ಯೋಜನೆಯಡಿ ಸೇರಿಸಿ 40 ಕೋಟಿ ರೂ. ಅನುದಾನದಲ್ಲಿ ನಿಲ್ದಾಣ ಅಭಿವೃದ್ಧಿಪಡಿಸುವುದೇ ಗುರಿ ಎಂದಿದ್ದಾರೆ.
ಅಮೃತ್ ಭಾರತ್ ಸ್ಟೇಷನ್ ಯೋಜನೆಗೆ ಮನವಿ:
ಕೇಂದ್ರ ಸಚಿವ ವಿ. ಸೋಮಣ್ಣ ಅವರು ನಿನ್ನೆ ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಮೈಸೂರಿನ ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಲಾಗಿದೆ. ರಾಜ್ಯದ 61 ರೈಲ್ವೆ ನಿಲ್ದಾಣಗಳು ಕೇಂದ್ರ ಸರ್ಕಾರದ 'ಅಮೃತ್ ಭಾರತ್ ಸ್ಟೇಷನ್' ಯೋಜನೆಯಡಿ ಅಭಿವೃದ್ಧಿಗೊಳ್ಳುತ್ತಿವೆ. ಇದೇ ಮಾದರಿಯಲ್ಲಿ ಅಶೋಕಪುರಂ ರೈಲ್ವೆ ನಿಲ್ದಾಣವನ್ನೂ ಈ ಯೋಜನೆಗೆ ಸೇರ್ಪಡೆಗೊಳಿಸುವಂತೆ ನಾನು ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಪ್ರತಾಪ್ ಸಿಂಹ ತಿಳಿಸಿದರು.
40 ಕೋಟಿ ಅನುದಾನದ ನಿರೀಕ್ಷೆ:
ಒಂದು ವೇಳೆ ಅಶೋಕಪುರಂ ನಿಲ್ದಾಣವು ಈ ಯೋಜನೆಗೆ ಸೇರಿದರೆ ಸುಮಾರು 40 ಕೋಟಿ ರೂಪಾಯಿಗಳ ಬೃಹತ್ ಅನುದಾನ ಲಭ್ಯವಾಗಲಿದೆ. ಇದರಿಂದ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತ್ತಷ್ಟು ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ. ಈ ಹಿಂದೆ ಸಂಸದನಾಗಿದ್ದಾಗಲೂ ಅಶೋಕಪುರಂ ನಿಲ್ದಾಣದ ಅಭಿವೃದ್ಧಿಗೆ ನಾನು ಶ್ರಮಿಸಿದ್ದೆ, ಈಗಲೂ ಅದೇ ಬದ್ಧತೆ ಮುಂದುವರಿಯಲಿದೆ ಎಂದರು.