ಎಂಜಿನಿಯರಿಂಗ್ ಶುಲ್ಕ ಏರಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ: ಸಚಿವ ಸುಧಾಕರ್
ಬೆಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಶೇ 20ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಮತ್ತು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿದ್ದಾರೆ.
ಹಿಂದಿನ ಸರ್ಕಾರ ವಾರ್ಷಿಕವಾಗಿ ಶೇ 10ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈಗಿನ ಸರ್ಕಾರ ಅದನ್ನು ರದ್ದುಗೊಳಿಸಿ ಪ್ರತಿ ವರ್ಷ ಪ್ರತ್ಯೇಕವಾಗಿ ನಿರ್ಧಾರ ಮಾಡುತ್ತಿದೆ. ಈ ವರ್ಷ ಶೇ 7.5ರಷ್ಟು ಹೆಚ್ಚಳದ ಬಗ್ಗೆ ಇನ್ನೂ ಅಧಿಕೃತ ನಿರ್ಧಾರವಾಗಿಲ್ಲ ಎಂದಿದ್ದಾರೆ. ಹೆಚ್ಚುವರಿ ಶುಲ್ಕ ನಿಯಂತ್ರಣ: ಕೆಲವು ಕಾಲೇಜುಗಳು ನಿಗದಿತ 'ಸಿಲೆಬಸ್ ಶುಲ್ಕ'ಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಕುರಿತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಸಿಲೆಬಸ್ ಶುಲ್ಕವನ್ನು ಕೆಇಎ ಮೂಲಕವೇ ಸಂಗ್ರಹಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಕರ್ಣಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ಉತ್ತಮ ಮೆಚ್ಚುಗೆ ವ್ಯಕ್ತವಾಗಿದೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಈ ವರ್ಷ ನೀಟ್ ಫಲಿತಾಂಶಕ್ಕೂ ಮುನ್ನವೇ ಇಂಜಿನಿಯರಿಂಗ್ ಸೀಟು ಭರ್ತಿ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದೂ ಅವರು ತಿಳಿಸಿದ್ದಾರೆ.