ಮಮತಾ ಬ್ಯಾನರ್ಜಿ CM ಸ್ಥಾನಕ್ಕೆ ರಾಜೀನಾಮೆ ಕೊಡದಿದ್ದರೆ ಏನಾಗ್ತದೆ? ಸಂವಿಧಾನ ಏನು ಹೇಳ್ತದೆ?
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಒಟ್ಟು 294 ಸ್ಥಾನಗಳ ಪೈಕಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಆಡಳಿತಕ್ಕೆ ಅಂತ್ಯ ಹಾಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ತಾವು ಸೋಲನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ನಾನು ಸೋತಿಲ್ಲ. ಬಿಜೆಪಿಯ ಈ ಜಯ ಅಕ್ರಮವಾದುದು. ಚುನಾವಣಾ ಆಯೋಗವು ಕೇಸರಿ ಪಡೆಯೊಂದಿಗೆ ಕೈಜೋಡಿಸಿ ಚುನಾವಣೆಯಲ್ಲಿ ಅಕ್ರಮ ಎಸಗಿದೆ. ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಮ್ಮ ಗೆಲುವನ್ನು ‘ಕದಿಯಲಾಗಿದೆ’. ಹಾಗಾಗಿ ನಾನು ರಾಜಭವನಕ್ಕೆ ಹೋಗುವುದಿಲ್ಲ, ರಾಜೀನಾಮೆಯನ್ನೂ ನೀಡುವುದಿಲ್ಲ ಎಂದು ಮಮತಾ ಗುಡುಗಿದ್ದಾರೆ. ಮತ ಎಣಿಕೆ ಕೇಂದ್ರದಲ್ಲಿ ತಮ್ಮ ಮೇಲೆ ಹಲ್ಲೆ ನಡೆದಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಮತ ಎಣಿಕೆ ಕೇಂದ್ರದಲ್ಲಿ ನನ್ನ ಹೊಟ್ಟೆ ಮತ್ತು ಬೆನ್ನಿಗೆ ಒದೆಯಲಾಯಿತು. ಆಗ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲಾಗಿತ್ತು ಎಂದು ಮಮತಾ ಆರೋಪಿಸಿದ್ದಾರೆ.
ಸಾಮಾನ್ಯವಾಗಿ ಚುನಾವಣೆಯಲ್ಲಿ ಸೋತ ನಂತರ ಮುಖ್ಯಮಂತ್ರಿಗಳು ರಾಜೀನಾಮೆ ನೀಡುವುದು ಒಂದು ಸಂಪ್ರದಾಯ. ಆದರೆ ಸಂವಿಧಾನದಲ್ಲಿ ಸೋತ ತಕ್ಷಣವೇ ರಾಜೀನಾಮೆ ನೀಡಬೇಕು ಎಂಬ ಕಡ್ಡಾಯ ನಿಯಮವಿಲ್ಲ. ಮುಖ್ಯಮಂತ್ರಿಯಾದವರು ವಿಧಾನಸಭೆಯಲ್ಲಿ ಬಹುಮತ ಹೊಂದಿರಬೇಕು ಎಂಬುದು ಮೂಲ ನಿಯಮ.